ತುಮಕೂರು: ದಲಿತ ಮಹಿಳೆಯೊಬ್ಬರ ಹತ್ಯೆ ಪ್ರಕರಣದಲ್ಲಿ 21 ಮಂದಿಯನ್ನು ಅಪರಾಧಿಗಳು ಎಂದು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಮೃತಪಟ್ಟಿದ್ದು, ಉಳಿದ 21 ಆರೋಪಿಗಳನ್ನು ಕೋರ್ಟ್ (Tumkur News) ಅಪರಾಧಿಗಳು ಎಂದು ಹೇಳಿದೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಯ ಹೊನ್ನಮ್ಮ ಕೊಲೆ ನಡೆದಿತ್ತು. ಸುದೀರ್ಘ 14 ವರ್ಷಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ತಿಳಿಸಿದರು.
ನಾಳೆ ಶಿಕ್ಷೆ ಪ್ರಕಟ
ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ಗುರುವಾರ (ನ.21) ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
ಅಪರಾಧಿಗಳು
ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ- ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್,ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಅಪರಾಧಿಗಳು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
ಆರೋಪಿಗಳ ಪೈಕಿ ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ | Hosur Crime: ಕೋರ್ಟ್ ಆವರಣದಲ್ಲಿ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ-ಅಣ್ಣಾಮಲೈ ಕಿಡಿ!
ಏನಿದು ಪ್ರಕರಣ?
ಡಾಬಾ ನಡೆಸುತ್ತಿದ್ದ ಗೋಪಾಲಪುರದ ಹೊನ್ನಮ್ಮ ಅವರು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಸದಾ ಒಂದಿಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು. ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮುಂದುವರಿದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.