Wednesday, 14th May 2025

ಜೀವ ಉಳಿಸಿದ ಸಮಯಪ್ರಜ್ಞೆ

ವಿದೇಶವಾಸಿ

dhyapaa@gmail.com

ವಿಮಾನ ಪ್ರಯಾಣವೇ ಹಾಗೆ. ಚಿಕ್ಕ ಮಕ್ಕಳೇ ಇರಲಿ, ವಯೋವೃದ್ಧರೇ ಆಗಲಿ, ಬಾನಯಾನವೆಂಬುದು ಪುಳಕ, ರೋಮಾಂಚನ. ಕೆಲವೊಮ್ಮೆ ಅಪಾಯ, ಅವಘಡ ಸಂಭವಿಸುವ ಸಾಧ್ಯತೆಗಳಿದ್ದರೂ, ತೀರಾ ಕಮ್ಮಿ ಎಂದೇ ಹೇಳಬಹುದು. ಹೀಗೆ ಸಂಭವಿಸುವ ದುರ್ಘಟನೆಗಳಲ್ಲಿ ಕೆಲವು ತಾಂತ್ರಿಕ ದೋಷ ಗಳಿಂದಾದರೆ ಕೆಲವು ಮನುಷ್ಯನ ತಪ್ಪಿನಿಂದ ಆಗುವಂಥದ್ದು.

ತಾಂತ್ರಿಕ ದೋಷವಿದ್ದರೂ, ಪೈಲಟ್‌ಗಳ ಸಮಯ ಪ್ರಜ್ಞೆಯಿಂದಾಗಿ ದುರ್ಘಟನೆಗಳು ತಪ್ಪಿದ್ದೂ ಇದೆ. ಈ ಘಟನೆ ನಡೆದದ್ದು ಸುಮಾರು ೩ ದಶಕಗಳ ಹಿಂದೆ. ಅಂದು ಮಧ್ಯ ಅಮೆರಿಕ ಪ್ರದೇಶದ ಎಲ್ ಸೆಲ್ವರ್ಡೊ ದೇಶದ ರಾಜಧಾನಿ ಸನ್ ಸೆಲ್ವಡೊರ್ ನಗರದಿಂದ ಟಾಕಾ ಏರ್ಲೈನ್ಸ್ ಸಂಸ್ಥೆಯ ವಿಮಾನ ವೊಂದು ಬಾನಿಗೆ ನೆಗೆದಿತ್ತು. ಘಟನೆ ಹೇಳುವುದಕ್ಕೆ ಮುಂಚೆ, ಟಾಕಾ ಸಂಸ್ಥೆಯ ಕಿರು ಪರಿಚಯ ಹೇಳುವುದಾದರೆ, ೧೯೩೧ರಲ್ಲಿ ಮಧ್ಯ ಅಮೆರಿಕ ಪ್ರದೇಶದಲ್ಲಿರುವ ಹೊಂಡುರಾಸ್ ದೇಶದಲ್ಲಿ ಸ್ಥಾಪಿಸಲ್ಪಟ್ಟ ಸಂಸ್ಥೆ ಅದು. ಕೆಲ ವರ್ಷಗಳ ನಂತರ ಎಲ್ ಸೆಲ್ವಡೊರ್ ದೇಶದ ಪ್ರಮುಖ ನಗರ ಸನ್ ಸೆಲ್ವಡೊರ್‌ ನಲ್ಲಿ ಪ್ರಧಾನ ಕಚೇರಿ ತೆರೆದು ಕಾರ್ಯನಿರ್ವ ಹಿಸುತ್ತಿತ್ತು.

ಸಂಸ್ಥೆ ಅಂದಿನ ದಿನಗಳಲ್ಲೇ ೧೫ ವಿಮಾನಗಳನ್ನು ಹೊಂದಿದ್ದು, ೨೪ ನಗರಗಳಿಗೆ ಸಂಪರ್ಕ ಕಲ್ಪಿಸಿಕೊಡುತ್ತಿತ್ತು. ಅಂದು ಮಧ್ಯ ಅಮೆರಿಕ ಪ್ರಾಂತ್ಯದಲ್ಲಿ ವಿಮಾನಯಾನದಲ್ಲಿ ೨ನೇ ಸ್ಥಾನದಲ್ಲಿದ್ದ ಸಂಸ್ಥೆ ೨೦೦೯ರಲ್ಲಿ ಸಹೋದರ ಸಂಸ್ಥೆಯಾದ ಅವಿಯಾಂಕಾ ಸಂಸ್ಥೆಯ ಜತೆಗೂಡಿ ೨೦೧೩ರ ಹೊತ್ತಿಗೆ ವಿಶ್ವದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಸ್ಟಾರ್ ಅಲಾಯನ್ಸ್‌ನಲ್ಲಿ ವಿಲೀನಗೊಂಡಿತು.

ಇರಲಿ, ಘಟನೆ ನಡೆದದ್ದು ೧೯೮೮ರ ಮೇನಲ್ಲಿ. ಸಂಸ್ಥೆ ಖರೀದಿಸಿದ ಹೊಸ ವಿಮಾನಗಳಲ್ಲಿ ಒಂದಾದ ಬೋಯಿಂಗ್ ೭೩೭-೩೦೦ ವಿಮಾನವು ಸೇವೆ ಆರಂಭಿಸಿ ಕೇವಲ ೨ ವಾರವಾಗಿತ್ತು. ವಿಮಾನ ಅಂದು ಸನ್ ಸೆಲ್ವಡೊರ್‌ನಿಂದ ಹೊರಟು, ಬೆಲೀಸ್‌ನಲ್ಲಿ ನಿಲುಗಡೆಯ ನಂತರ ಅಮೆರಿಕದ ನ್ಯೂ ಓರ್ಲಿಯನ್ಸ್ ನಗರಕ್ಕೆ ತಲುಪಬೇಕಿತ್ತು. ಮೊದಲ ಹಂತದ ಪ್ರಯಾಣ ಸುಗಮವಾಗಿತ್ತು. ೨ನೇ ಹಂತದ ಪ್ರಯಾಣ ಕ್ಕೆಂದು ಬೆಲೀಸ್‌ನಿಂದ ಹೊರಟ ವಿಮಾನ ದಲ್ಲಿ ಅಂದು ೩೮ ಪ್ರಯಾಣಿಕರಿದ್ದರು. ಕ್ಯಾಪ್ಟನ್ ಕಾರ್ಲೊಸ್ ದಾರ್ಡಾನೊ, ಫಸ್ಟ್ ಆಫಿಸರ್, ಲೈನ್ ಟ್ರೇನಿಂಗ್ ಕ್ಯಾಪ್ಟನ್ (ಹೊಸ ವಿಮಾನ ಗಳಲ್ಲಿ ಮಾತ್ರ ಕಾರ್ಯವೀಕ್ಷಣೆಗೆ ಇರುತ್ತಾರೆ) ಮತ್ತು ಗಗನ ಸಖಿಯರೂ ಸೇರಿ ಒಟ್ಟು ೭ ಕ್ಯಾಬಿನ್ ಸಿಬ್ಬಂದಿ ಯಿದ್ದರು.

ಹೊಸ ತಂತ್ರಜ್ಞಾನದ ವಿಮಾನವಾದ್ದರಿಂದ ಎಲ್ಲರೂ ಅತ್ಯುತ್ಸಾಹದಲ್ಲಿದ್ದರು. ಸಿಬ್ಬಂದಿಗೆ ತಾವು ಆ ವಿಮಾನಯಾನದಲ್ಲಿ ಭಾಗಿಯಾಗುವುದೇ ಹೆಮ್ಮೆಯ
ವಿಚಾರವಾಗಿದ್ದರೆ, ಕಾಕ್‌ಪಿಟ್ ನೋಡಲು, ಫೋಟೊ ತೆಗೆಸಿಕೊಳ್ಳಲು ಅವಕಾಶ ಒದಗಿಸಿಕೊಟ್ಟಿದ್ದರಿಂದ ಪ್ರಯಾಣಿಕರಿಗೂ ಹೊಸ ಅನುಭವವಾಗಿತ್ತು. ಎಂದಿನಂತೆ ಪ್ರಯಾಣ ಮುಂದುವರಿಸಿದ ಬೋಯಿಂಗ್ ಇನ್ನೇನು ಕೆಲವೇ ಕ್ಷಣಗಳಲ್ಲಿ ತನ್ನ ಅಂತಿಮ ತಾಣ ನ್ಯೂ ಓರ್ಲಿಯನ್ಸ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು, ಹಾಗಾಗಲಿಲ್ಲ.

ವಿಮಾನ ಭೂಮಿಯಿಂದ ಸುಮಾರು ೩೦ ಸಾವಿರ ಅಡಿ (ಸುಮಾರು ೯ ಸಾವಿರ ಮೀಟರ್) ಮೇಲೆ ಹಾರುತ್ತಿರುವಾಗ ಸ್ವಲ್ಪ ಮುಂದೆ ಎರಡೂ ಕಡೆಗಳಲ್ಲಿ
ಗುಡುಗು, ಬಿರುಗಾಳಿ, ಮಳೆ ಮೋಡದ ಗುಡ್ಡೆ ಇರುವುದನ್ನು ‘ವೆದರ್ ರೆಡಾರ್’ನಲ್ಲಿ ಕಂಡ ಪೈಲಟ್ ಗಳಿಬ್ಬರೂ ಮಾರ್ಗ ಬದಲಿಸಲು ನಿರ್ಧರಿಸಿದರು.
ನಿಮಗೆ ತಿಳಿದಿರಬಹುದು, ಸಾಮಾನ್ಯವಾಗಿ ವಿಮಾನದ ಮುಂತುದಿಯಲ್ಲಿರುವ ಮೊನಚಾದ ಭಾಗದಲ್ಲಿ (ನೋಸ್ ಕೋನ್) ಹವಾಮಾನ ವರದಿ ತಿಳಿಯ
ಲೆಂದು ಅಂಟೆನಾ ಅಳವಡಿಸಿರುತ್ತಾರೆ. ಅಂಟೆನಾದಿಂದ ಹೊರಬೀಳುವ ರೆಡಾರ್ ಪಲ್ಸ ಅಥವಾ ಸಿಗ್ನಲ್ ಮುಂದಿರುವ ಮೋಡ, ಹಿಮ ಇತ್ಯಾದಿಗಳಿಗೆ
ಬಡಿದು, ಪುಟಿದು ಹಿಂದೆ ಬರುತ್ತದೆ. ಹೀಗೆ ಬರುವ ಪಲ್ಸ್‌ಗಳ ಗತಿಯ ಮೇಲೆ ಮುಂದೆ ಬರುವ ಅಡಚಣೆ ಯಾವ ಪ್ರಾಮಾಣದಲ್ಲಿದೆ, ಎಷ್ಟು ದೂರವಿದೆ ಎಂದು ತಿಳಿಯುತ್ತದೆ.

ಆದರೆ ಈ ರೆಡಾರ್ ಪಕ್ಕಾ ಫಲಿತಾಂಶ ಕೊಡುತ್ತವೆ ಎನ್ನಲಾಗದು. ಏಕೆಂದರೆ ಪಲ್ಸ್‌ಗಳು ತಮ್ಮ ಮುಂದಿರುವ ಅಡಚಣೆಯನ್ನು ಗುರುತಿಸಬಲ್ಲ
ವಾದರೂ ಅದರ ಹಿಂದಿರುವ ಅಡಚಣೆಗಳನ್ನು (ಇದನ್ನು ರೆಡಾರ್ ಶ್ಯಾಡೋ ಎನ್ನುತಾರೆ) ಗುರುತಿಸದಿರುವ ಸಾಧ್ಯತೆಗಳೂ ಇರುತ್ತವೆ. ಇರಲಿ, ತಮ್ಮ
ಪ್ರಯಾಣದ ಮುಂದೆ ಅಡಚಣೆ ಇರುವುದನ್ನು ತಿಳಿದ ಪೈಲಟ್‌ಗಳು ಸಮೀಪದ ವಾಯುಸಂಚಾರ ನಿಯಂತ್ರಣಾಲಯವನ್ನು ಸಂಪರ್ಕಿಸಿ ಪರವಾನಗಿ
ಪಡೆದು, ಮೋಡ, ಬಿರುಗಾಳಿ ತಪ್ಪಿಸಲು, ಸುತ್ತು ಮಾರ್ಗ ಬಳಸಿದರು. ಅಂದು ವಿಮಾನದ ದಿಕ್ಕು ಬದಲಿಸುವಂತೆ ಪೈಲಟ್‌ಗಳ ದಿಕ್ಕುತಪ್ಪಿಸಿದ್ದು
ಮಾತ್ರ ಅದೇ ರೆಡಾರ್‌ಗಳು!

ಸಣ್ಣ ಅಡಚಣೆ ತಪ್ಪಿಸಲು ದಿಕ್ಕು ಬದಲಿಸಿದ ವಿಮಾನ ದೊಡ್ಡ ಮೋಡದ ಮುಸುಕಿನೊಳಕ್ಕೆ ನುಗ್ಗಿ ಕಂಟಕಕ್ಕೆ ಸಿಲುಕಿತ್ತು. ವಿಮಾನ ಕ್ಷಣಾರ್ಧದಲ್ಲಿ
ಮತ್ತೆ ದಿಕ್ಕು ಬದಲಿಸಲಾಗದಷ್ಟು ಮುನ್ನುಗ್ಗಿ ಟರ್ಬುಲನ್ಸ್ ಒಳಗೆ ಸಿಕ್ಕಿಕೊಂಡಿತು. ಬಾಣಲೆಯಿಂದ ಹಾರಿ ಬೆಂಕಿಗೆ ಬಿದ್ದಂತಾಗಿತ್ತು ಪರಿಸ್ಥಿತಿ. ಪೂರ್ವ ನಿರ್ಧರಿತ ದಾರಿ ಯಲ್ಲಿ ಹೋಗಿದ್ದರೆ ಏನಾಗುತ್ತಿತ್ತೋ ಗೊತ್ತಿಲ್ಲ, ಬದಲಿ ಸಿದ ದಾರಿಯಲ್ಲಿ ಮಳೆ, ಬಿರುಗಾಳಿಯಷ್ಟೇ ಅಲ್ಲ, ದೊಡ್ಡ ಆಲಿಕಲ್ಲುಗಳೂ ಸುರಿಯುತ್ತಿದ್ದವು. ಕ್ಯಾಪ್ಟನ್ ಕಾರ್ಲೋಸ್ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನದ ಎರಡೂ ಎಂಜಿನ್‌ಗಳನ್ನು ಸ್ಟಾರ್ಟ್ ಮಾಡಿದ್ದ. ಇಂಥ ವೇಳೆ
ನೀರು, ಹಿಮ (ಕೆಲವೊಮ್ಮೆ ಹಕ್ಕಿ) ಇತ್ಯಾದಿ ಯಂತ್ರದೊಳಗೆ ಹೋಗದಂತೆ ಇದು ತಡೆಯುತ್ತದೆ. ಆದರೆ ಅಂದಿನ ಮಳೆ ಸಾಮಾನ್ಯದ್ದಾಗಿರಲಿಲ್ಲ, ಪ್ರತಿ ಗಂಟೆಗೆ ೩೦ ಇಂಚಿನಷ್ಟಿತ್ತು.

ಸಾಲದೆಂಬಂತೆ ದೊಡ್ದ ಆಲಿಕಲ್ಲುಬಂದೂಕಿನಿಂದ ಸಿಡಿದು ಬಂದ ಗುಂಡಿನಂತೆ ಅಪ್ಪಳಿಸುತ್ತಿತ್ತು. ಸಾಮಾನ್ಯವಾಗಿ ವಿಮಾನದ ಯಂತ್ರದೊಳಗೆ ಎಷ್ಟು ನೀರು ಸೇರಿಕೊಳ್ಳಬಹುದೆಂದು ಅಂದಾಜಿಸುತ್ತಾರೋ ಅದರ ೩-೪ ಪಟ್ಟು ಹೆಚ್ಚು ನೀರು ಬಂದರೂ ನಿಯಂತ್ರಿಸಿ, ಯಂತ್ರ ಕಾರ್ಯ ನಿರ್ವಹಿಸುವಂತೆ ವಿನ್ಯಾಸಗೊಳಿಸಿರುತ್ತಾರೆ. ಆದರೆ ಆ ಪ್ರಮಾಣದ ಮುಗಿಲ್ಗಲ್ಲನ್ನು ಆ ದಿನಗಳಲ್ಲಿ ಯಾರೂ ಅಪೇಕ್ಷಿಸಿರಲಿಲ್ಲ. ಅಂದು ಆಲಿಕಲ್ಲು ಯಂತ್ರದೊಳಕ್ಕೆ
ಸೇರಿಕೊಂಡು ಕೆಲವೇ ನಿಮಿಷಗಳಲ್ಲಿ ತನ್ನ ಕೆಲಸ ಶುರುವಿಟ್ಟುಕೊಂಡಿತು. ವಿಮಾನದಲ್ಲಿ ಎಂಜಿನ್‌ಗೆ ಜೋಡಿಸಿದ ಪವರ್ ಜನರೇಟರ್‌ನಿಂದ ವಿದ್ಯುಚ್ಛಕ್ತಿ
ಪಡೆಯಲಾಗುತ್ತದೆ. ಅಂದು ಆಲಿಕಲ್ಲಿನ ಪ್ರಭಾವ, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ವಿಮಾನದಲ್ಲಿ ಗಾಢಾಂಧಕಾರ.

ವಿಮಾನದಲ್ಲಿ ಬೆಳಕಿಲ್ಲದಿದ್ದರೆ ಹೇಗೋ ಸುಧಾರಿಸಬಹುದು, ಕಾಕ್‌ಪಿಟ್ ಕತ್ತಲೆಯಲ್ಲಿ ಮುಳುಗಿದರೆ ಮಾಡುವುದೇನು? ವಿಮಾನದಲ್ಲಿ ಇಂಥ ತುರ್ತು ಸಮಯಕ್ಕೆ ಆಗಲೆಂದೇ ಬ್ಯಾಟರಿ ಅಳವಡಿಸಿರುತ್ತಾರೆ. ಅರ್ಧ ಗಂಟೆಯವರೆಗೆ ತೀರಾ ಅವಶ್ಯಕ ಬಳಕೆಗೆ ಈ ಬ್ಯಾಟರಿ ಸಹಕರಿಸುತ್ತದೆ. ಇಲ್ಲಿ ಬ್ಯಾಟರಿ ಯದ್ದೂ ಒಂದು ಕತೆಯಿದೆ. ಒಂದು ದಿನ ಮುಂಚೆಯಷ್ಟೇ ಅದೇ ಮಾರ್ಗದಲ್ಲಿ ಸಾಗಬೇಕಿದ್ದ ಇದೇ ವಿಮಾನದ ಪಯಣವನ್ನು ಬ್ಯಾಟರಿಯ ಸಮಸ್ಯೆ ಯಿಂದಾಗಿ ರದ್ದುಗೊಳಿಸಲಾಗಿತ್ತು. ಅಂದು ಪ್ರಯಾಣಿಕರೆಲ್ಲ ವಿಮಾನದಲ್ಲಿ ಕುಳಿತಾಗಿತ್ತು, ಇನ್ನೇನು ಹೊರಡಬೇಕೆನ್ನುವಾಗ ಎಂಜಿನ್ ಸ್ಟಾರ್ಟ್ ಆಗಲಿಲ್ಲ.

ತಾಂತ್ರಿಕ ತಂಡದವರನ್ನು ಕರೆಸಿ ನೋಡಿದಾಗ ಬ್ಯಾಟರಿಯ ಶಕ್ತಿಗುಂದಿರುವುದಾಗಿ ಹೇಳಿದರು. ಹೊಸ ವಿಮಾನದಲ್ಲಿ ಅದು ಹೇಗೆ ಸಾಧ್ಯ? ಅದು ವಿಮಾನ ತಯಾರಾಗಿ ಬಹಳ ದಿನಗಳವರೆಗೆ ಚಾಲನೆಯಿಲ್ಲದೇ ನಿಂತ ಪರಿಣಾಮ ಎಂದು ತಂತ್ರಜ್ಞರು ಸಮಜಾಯಿಷಿ ಹೇಳಿದ್ದರು. ಅಂದು ಹಳೆ ಬ್ಯಾಟರಿ ತೆಗೆದು ಹೊಸ ಬ್ಯಾಟರಿ ಜೋಡಿಸಿದ್ದರು. ಒಂದು ವೇಳೆ ಹಳೆಯ ಬ್ಯಾಟರಿಯೇ ಇದ್ದು, ಈ ಸಂದರ್ಭದಲ್ಲಿ ಕೈಕೊಟ್ಟಿದ್ದರೆ? ಮೋಡದ ಮಧ್ಯೆ ವಿಮಾನ ನಡೆಸು ತ್ತಿದ್ದ ಕ್ಯಾಪ್ಟನ್‌ಗೆ ಅಕ್ಕ ಪಕ್ಕ, ಮುಂದೆ, ಕೆಳಗೆ, ಮೋಡ ಮತ್ತು ಮಳೆ ಬಿಟ್ಟರೆ ಏನೂ ಕಾಣುತ್ತಿರಲಿಲ್ಲ. ಆಗಲೇ ಭೂಮಿಯೊಂದಿಗಿನ ಸಂಪರ್ಕವೂ
ಕಡಿದುಹೋಯಿತು. ‘ಎರಡೂ ಯಂತ್ರಗಳು ಕೆಲಸ ಮಾಡುತ್ತಿಲ್ಲ’ ಎಂದು ಮೊದಲ ಬಾರಿ ಆತ ಹೇಳಿದಾಗ ಜತೆಯಲ್ಲಿದ್ದವರೇ ನಂಬಲಿಲ್ಲ.

ಬದಲಾಗಿ, ‘ಇಂಥ ಸಂದರ್ಭದಲ್ಲೂ ತಮಾಷೆಯಾ?’ ಎಂದರು. ಕರೆದು ತೋರಿಸಿದಾಗಲೇ ಅವರಿಗೆ ನಂಬಿಕೆ ಬಂದದ್ದು. ಆಗಲೇ ಅವರ ಎದೆಯ ಮೂಲೆ ಯಲ್ಲಿ ನಡುಕ ಹುಟ್ಟಿತ್ತು. ಅದು ತಪ್ಪೂ ಅಲ್ಲ, ಏಕೆಂದರೆ ಒಂದೇ ಸಲ ಎರಡೂ ಯಂತ್ರಗಳು ನಿಂತದ್ದು ಅದೇ ಮೊದಲ ಬಾರಿಯಾಗಿತ್ತು. ವಿಮಾನ ತಯಾರಿಸುವ ಕಾರ್ಖಾನೆಗಳೂ ಆ ಮೊದಲು ಅದನ್ನು ಯೋಚಿಸಿರಲಿಲ್ಲ. ಹೇಗಾದರೂ ಒಂದು ಯಂತ್ರ ವಾದರೂ ನಡೆಯುವಂತಾದರೆ ಸಾಕು ಎಂದು ಕಾರ್ಲೋಸ್ ಪ್ರಾರ್ಥಿ ಸುತ್ತಿದ್ದನಾದರೂ, ಧೈರ್ಯದಿಂದ ವಿಮಾನದ ವೇಗ ತಗ್ಗಿಸದೇ ಮುನ್ನಡೆಸುತ್ತಿದ್ದ. ಆ ಕ್ಷಣ ಅದೇ ಸರಿಯಾದ ನಿರ್ಣಯವೂ ಆಗಿತ್ತು. ವೇಗ ತಗ್ಗಿಸಿದರೆ ವಿಮಾನ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆಯಿತ್ತು.

ವಿದ್ಯುತ್ ನಿಂತಾಗ ಕೆಲವೊಮ್ಮೆ ವಿಂಡ್ ಮಿಲ್ಲಿಂಗ್ ಸ್ಟಾರ್ಟ್ ವಿಧಾನದಿಂದ (ಎದುರಿಂದ ಬೀಸುವ ಗಾಳಿ ಯನ್ನು ಬಳಸಿಕೊಂಡು) ಇಂಜಿನ್ ಸ್ಟಾರ್ಟ್ ಮಾಡುವ ಅವಕಾಶವಿರುತ್ತದೆ. ಸಹಚರರು ಯತ್ನಿಸಿ ದರೂ, ನೀರು ತುಂಬಿದ್ದರಿಂದ ಅದು ಸಾಧ್ಯವಾಗ ಲಿಲ್ಲ. ಕಾರ್ಲೋಸ್ ಮುಂದಿನ ಕೆಲ ನಿಮಿಷ ಗಳಲ್ಲಿ ವಿಮಾನದ ಹಾರಾಟವನ್ನು ೩೦ ಸಾವಿರ ಅಡಿಯಿಂದ ೧೬ ಸಾವಿರ ಅಡಿಗಳಿಗೆ ತಗ್ಗಿಸಿದ್ದಷ್ಟೇ ಅಲ್ಲ, ವಿಮಾನ ವನ್ನು ಮೋಡದ ಮುಸುಕಿ
ನಿಂದ ಹೊರಗೂ ತಂದಿದ್ದ. ಒಳಗಿನ ನೀರು ಕಮ್ಮಿಯಾಗಿ ಇಂಜಿನ್ ಸ್ಟಾರ್ಟ್ ಮಾಡುವಂತಾಯಿತಾ ದರೂ, ಯಂತ್ರದ ಬಹುಭಾಗ ಒದ್ದೆಯಾಗಿದ್ದರಿಂದ
ಅದು ಸಕ್ಷಮವಾಗಿ ಕಾರ್ಯ ನಿರ್ವಹಿಸುವ ಸ್ಥಿತಿಯಲ್ಲಿರಲಿಲ್ಲ.

ಏರ್ ಟ್ರಾಫಿಕ್ ಕಂಟ್ರೋಲ್‌ನೊಂದಿಗೆ ಪುನಃ ಸಂಪರ್ಕ ದೊರಕಿರೂ ನಿಗದಿತ ಏರ್‌ಪೋರ್ಟ್ ತಲುಪಿ ಸುರಕ್ಷಿತವಾಗಿ ಇಳಿಯುವ ಸ್ಥಿತಿಯಲ್ಲಿ ವಿಮಾನ ಇರಲಿಲ್ಲ. ಅವರೂ ಹತ್ತಿರದ ಸರೋವರದ, ಹೆದ್ದಾರಿಯ ಇಳಿಸುವಂತೆ ಪರ್ಯಾಯ ವ್ಯವಸ್ಥೆಗೆ ಸಲಹೆ ನೀಡುತ್ತಿದ್ದರು. ಈ ಮಧ್ಯೆ ಹಾರಾಟವನ್ನು ೫ ಸಾವಿರ ಅಡಿಗೆ ಇಳಿಸಿದ್ದ ಕಾರ್ಲೋಸ್ ಒಂದು ನಿರ್ಣಯಕ್ಕೆ ಬಂದಿದ್ದ. ಎಮರ್ಜೆನ್ಸಿ ಲ್ಯಾಂಡಿಂಗ್‌ಗೆ ಸಿದ್ಧವಾಗುವಂತೆ ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ. ಆ ಕ್ಷಣದಲ್ಲಿ ಸುಮಾರು ೨೫ ಕಿಲೋಮೀಟರ್ ದೂರದಲ್ಲಿ ಕಂಡ ರನ್ ವೇ ಆಕಾರದಲ್ಲಿರುವ ಕಾಲುವೆ ಅವನಲ್ಲಿ ಧೈರ್ಯ ಮೂಡಿಸಿತ್ತು. ಯಾವುದೇ ವಿಮಾನವಾದರೂ ಯಂತ್ರದ ಸಹಾಯವಿಲ್ಲದೇ ೧೦೦ ಕಿ.ಮೀ. ದೂರದವರೆಗೆ ತೇಲುತ್ತದೆ. ಹಾಗೆ ತೇಲಲು ಅದಕ್ಕಿರುವ ರೆಕ್ಕೆಯ ಬಲವೇ ಸಾಕು. ಪ್ರತಿ ೧೦
ಕಿ.ಮೀ. ಮುಂದೆ ಹೋಗುತ್ತಿದ್ದಂತೆ ೧ ಕಿ.ಮೀ. ಕೆಳಗೆ ಇಳಿಯುತ್ತದೆ.

ಈ ರೀತಿ ೨೦-೩೦ ನಿಮಿಷಗಳವರೆಗೆ ಯಂತ್ರಗಳ ಸಹಾಯವಿಲ್ಲದೆ ವಿಮಾನ ಚಲಿಸಬಲ್ಲದು. ಇಂಥ ಸಂದರ್ಭದಲ್ಲಿ ಅಷ್ಟರೊಳಗೆ ಪರಿಹಾರ ಕಂಡುಕೊಳ್ಳ ಬೇಕು. ಕಾರ್ಲೋಸ್‌ನ ಲಕ್ಷ್ಯವೆಲ್ಲ ಕಾಲುವೆಯ ಪಕ್ಕದಲ್ಲಿದ್ದ ದಂಡೆಯ ಮೇಲಿತ್ತು. ಅದೊಂದು ಕೃತಕ ಕಾಲುವೆಯಾದ್ದರಿಂದ ಅದಕ್ಕೆ ನಿರ್ಮಿಸಿದ ಒಡ್ಡು ಕೂಡ ರಸ್ತೆಯಂತೇ ಇತ್ತು. ಆದರೆ ಅದು ವಿಮಾನ ಇಳಿಸಲು ಬೇಕಾದಷ್ಟು ಅಗಲವಾಗಿರಲಿಲ್ಲ. ಸ್ವಲ್ಪ ದೂರದಲ್ಲಿ ಒಡ್ಡಿನ ಪಕ್ಕದಲ್ಲಿ ಸುಮಾರಾಗಿ ಸಮತಟ್ಟಾದ ಸಣ್ಣ ಒಣಹುಲ್ಲಿರುವ ಪ್ರದೇಶ ವೊಂದನ್ನು ಕಂಡ ಆತ, ಅಲ್ಲಿ ವಿಮಾನ ಇಳಿಸಲು ನಿರ್ಧರಿಸಿದ. ಅದು ಒಣ ಪ್ರದೇಶವಾ, ಹಸಿ
ಭೂಮಿಯಾ ಎಂದು ಸರಿಯಾಗಿ ಕಾಣುತ್ತಿರಲಿಲ್ಲ.

ಅದಕ್ಕೆ ಇನ್ನಷ್ಟು ಕೆಳಗೆ ಇಳಿಸಿದ ಆತ ಆಗಲೇ ಚಕ್ರಗಳನ್ನು ಹೊರತೆಗೆದು ಲ್ಯಾಂಡಿಂಗ್‌ಗೆ ತಯಾರಿ ನಡೆಸಿದ. ಜತೆಗೆ ಸ್ಲೆ ಡ್ ಸ್ಲಿಪ್ ಟೆಕ್ನಾಲಜಿ ಬಳಸಲು
ನಿರ್ಧರಿಸಿದ. ಈ ಪದ್ಧತಿಯು ಗ್ಲೆ ಡರ್ಸ್ ಅಥವಾ ಸಣ್ಣವಿಮಾನ ಇಳಿಸಲು, ಮತ್ತು ಬ್ರೇಕ್‌ನಂತೆ ಬಳಸಿಕೊಳ್ಳಲು ನೆರವಾಗುತ್ತದೆಯಾದರೂ ಯಂತ್ರಕ್ಕೆ
ಹಾನಿಯಾಗುವುದರಿಂದ ಇದನ್ನು ಬಳಸುವುದು ವಿರಳ. ಆದರಿಲ್ಲಿ ಇದ್ದ ಎರಡೂ ಯಂತ್ರಗಳು ನಿಂತು ಹೋದದ್ದರಿಂದ ಕಾರ್ಲೋಸ್‌ಗೆ ಕಳೆದು ಕೊಳ್ಳುವುದು ಏನೂ ಇರಲಿಲ್ಲ. ಅಂದು ಆತ ಮಣ್ಣು ಭೂಮಿಯಲ್ಲಿ ವಿಮಾನವನ್ನು ಬೆಣ್ಣೆಯಷ್ಟೇ ಮೃದುವಾಗಿ ಇಳಿಸಿದ್ದ!

ಒಬ್ಬ ಪ್ರಯಾಣಿಕನಿಗೆ ಸಣ್ಣ ಪುಟ್ಟ ಗಾಯವಾದದ್ದು ಬಿಟ್ಟರೆ ಉಳಿದವರೆಲ್ಲ ಸುರಕ್ಷಿತವಾಗಿದ್ದರು. ವಿಮಾ ನಕ್ಕೂ ಯಾವುದೇ ಹಾನಿಯಾಗಲಿಲ್ಲ.  ಪ್ರಯಾಣಿಕರನ್ನೆಲ್ಲ ಕೆಳಗೆ ಇಳಿಸುವ ಹೊತ್ತಿಗೆ ಅಲ್ಲೂ ಮಳೆ ಶುರುವಾಗಿತ್ತು. ಸಾಮಾನ್ಯವಾಗಿ ಇಂಥ ವೇಳೆ ಎಲ್ಲರೂ ಆದಷ್ಟು ಬೇಗ ವಿಮಾನದಿಂದ ಹೊರಬರಲು ಬಯಸುತ್ತಾರೆ. ಎಲ್ಲ ಕೆಳಗಿಳಿದ ನಂತರವೂ ಬಹಳಷ್ಟು ಹೊತ್ತು ತನ್ನ ಗರ್ಭಗುಡಿಯಾದ ಕಾಕ್‌ಪಿಟ್‌ನಲ್ಲಿಯೇ ಕುಳಿತಿದ್ದ ಕ್ಯಾಪ್ಟನ್ ಕಾರ್ಲೋಸ್ ಮಾತ್ರ ಮಳೆ ನಿಂತ ನಂತರವೇ ಕೆಳಗೆ ಇಳಿದುಬಂದಿದ್ದ. ತಾನು ನಂಬಿದ ದೇವಾಲಯ ಮತ್ತು ಭಕ್ತರು, ಇಬ್ಬರನ್ನೂ ಕಾಪಾಡಿದ
ಧನ್ಯತೆ ಆತನಲ್ಲಿತ್ತು.

ವಿಮಾನ ಇಳಿಸಿದ್ದಾಯಿತು, ಮುಂದೇನು? ಅದನ್ನು ಅಲ್ಲಿಂದ ಸಾಗಿಸುವುದು ಹೇಗೆ? ಮಳೆ ಬಂದು ಭೂಮಿ ಹಸಿಯಾಗಿತ್ತು. ಅದು ಒಣಗುವಾಗ ೧೩ ದಿನ ಕಳೆದುಹೋಗಿತ್ತು. ಈ ನಡುವೆ, ಬೇಕಾದ ಸಣ್ಣ ಪುಟ್ಟ ರಿಪೇರಿ ಮಾಡಿಕೊಳ್ಳಲಾಯಿತು. ವಿಮಾನವಿದ್ದ ಸ್ಥಳದ ಸಮೀಪದಲ್ಲಿ ರಸ್ತೆಯೊಂದು ಹಾದು
ಹೋಗುತ್ತಿತ್ತು. ನಿಧಾನವಾಗಿ ರಸ್ತೆವರೆಗೆ ತಂದು ಅದೇ ರಸ್ತೆಯನ್ನು ರನ್‌ವೇ ಆಗಿ ಬಳಸಿಕೊಂಡು ವಿಮಾನ ಬಾನಿಗೆ ಚಿಮ್ಮಿ ತನ್ನ ತಾಣ ಸೇರಿಕೊಂಡಿತು. ಈ ಘಟನೆ ಹೊಸದೊಂದು ಅನ್ವೇಷಣೆಗೆ ದಾರಿಯಾಯಿತು.

ಅಲ್ಲಿಯವರೆಗೆ ಎಂಜಿನ್‌ನ ಪಂಖದ ಮುಂಭಾಗ ಶಂಕುವಿನ ಆಕಾರದಲ್ಲಿರುತ್ತಿತ್ತು. ಆಲಿಕಲ್ಲಿನಂಥ ವಸ್ತುಗಳಿಂದ ಬಚಾವು ಮಾಡಿಕೊಳ್ಳಲು ಅದನ್ನು
ಅಂಡಾಕಾರಕ್ಕೆ ಅಥವಾ ಎರಡರ ಮಿಶ್ರಣವಾಗಿ (ಕೋನಿಲಿಪ್ಟಿಕಲ) ಮಾರ್ಪಡಿಸಲಾಯಿತು. ಎಂಜಿನ್ ಒಳಗೆ ನೀರು ಸೇರಿದರೆ ಹರಿದು ಹೋಗಲು ಹೆಚ್ಚಿನ
ಬ್ಲೀಡ್ ವಾಲ್ವ್‌ಗಳನ್ನು ಅಳವಡಿಸಲಾಯಿತು. ಸಣ್ಣ ವಸ್ತುಗಳು ಒಳಗೆ ಸೇರದಂತೆ ತಡೆಯಲು ಎಂಜಿನ್‌ನ -ನ್‌ನಲ್ಲಿರುವ ಎಲೆಗಳನ್ನು ಇನ್ನೂ ಹತ್ತಿರಕ್ಕೆ
ಜೋಡಿಸಲಾಯಿತು.

ಒಟ್ಟಿನಲ್ಲಿ ಈ ಒಂದು ಘಟನೆ ವಿಮಾನದ ಯಂತ್ರದಲ್ಲಿ ಇನ್ನಷ್ಟು ಆವಿಷ್ಕರಿಸಿ ಬದಲಾವಣೆ ತರುವಂತಾಯಿತು. ಅದರಲ್ಲೂ ಯಾವುದೇ ಜೀವಕ್ಕೆ ಹಾನಿಯಾಗದೇ! ಒಂದು ವಿಷಯ ಮರೆತಿz, ಇಷ್ಟಕ್ಕೆಲ್ಲ ಕಾರಣನಾದ ಕ್ಯಾಪ್ಟನ್ ಕಾರ್ಲೋಸ್‌ಗೆ ಇದ್ದದ್ದು ಒಂದೇ ಕಣ್ಣು…

Leave a Reply

Your email address will not be published. Required fields are marked *