Wednesday, 14th May 2025

ಪ್ರವಾಸಿಗರ ದೋಣಿ ಮುಳುಗಡೆ: 18 ಮಂದಿ ಸಾವು

ಮಲಪ್ಪುರಂ (ಕೇರಳ) : ಪ್ರವಾಸಿಗರನ್ನು ಹೊತ್ತು ಸಾಗುತ್ತಿದ್ದ ದೋಣಿ ಮುಳುಗಡೆಯಾಗಿ ಸುಮಾರು 18 ಮಂದಿ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

ಪರಪನಂಗಡಿಯ ಕೆಟ್ಟುಂಗಲ್ ಬೀಚ್‌ನಲ್ಲಿ ಅವಘಡ ಸಂಭವಿಸಿದೆ. ದೋಣಿಯಲ್ಲಿ 25ಕ್ಕೂ ಹೆಚ್ಚು ಮಂದಿ ಇದ್ದರು ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ದೋಣಿಯಲ್ಲಿ ಹೆಚ್ಚು ಜನರನ್ನು ಸಾಗಿಸಿದ ಕಾರಣ ದೋಣಿ ಮುಳುಗಡೆಯಾಗಿದೆ ಎಂದು ಹೇಳಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ದೋಣಿ ಮುಳುಗಡೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆರೋಗ್ಯ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳನ್ನು ಪರಪ್ಪನಂಗಡಿ, ತಾನೂರ್, ತಿರೂರು ಮತ್ತು ತಿರುರಂಗಡಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.