Monday, 12th May 2025

ಮತದಾರರು ತಪ್ಪದೇ ಮತದಾನ ಮಾಡಿ: ಜಿಲ್ಲಾಧಿಕಾರಿ

ತುಮಕೂರು:  ಮೇ .10ಕ್ಕೆ ನಡೆಯುವ ಮತದಾನದ ದಿನದಂದು ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸ ಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್  ಹಾಗೂ ಸ್ವೀಪ್ ವತಿಯಿಂದ ಭಾನುವಾರ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಬಳಿ ಮತದಾನದ ಕುರಿತು ಮತದಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಪೌರಾಣಿಕ, ಐತಿಹಾಸಿಕ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಪ್ರವಾಸೋಧ್ಯಮ ಇಲಾಖೆಯಿಂದ ಆ ಸ್ಥಳಗಳನ್ನು ಅಭಿವೃದ್ದಿ ಪಡಿಸಲಾಗಿದೆ,  ಪ್ರವಾಸಿ ತಾಣಗಳನ್ನು ಉಳಿಸುವುದಕ್ಕಾಗಿ  ಅಲ್ಲಿ ಸ್ವಚ್ಚತೆ ಕಾಪಾಡುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸು ವುದು ಹಾಗೂ ಮೇ 10ರಂದು ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನದ ಕುರಿತು  ಮತದಾರರಿಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಾದ್ಯಂತ ಸ್ವೀಪ್ ಚಟುವಟಿಕೆಗಳು ನಡೆಯು ತ್ತಿವೆ. ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಇಂದು ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಸೇರಿ ಪ್ರವಾಸಿ ತಾಣವಾದ ರಾಮದೇವರ ಬೆಟ್ಟವನ್ನು ಚಾರಣ ಮಾಡಲಾಗುವುದು ಎಂದರು.
 ಈ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕ ರಘು, ಜಿಲ್ಲಾ ನಿರ್ಮಿತಿ ಕೇಂದ್ರದ ರಾಜಶೇಖರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಅತಿಕ್ ಪಾಷ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಅಭಿಯಂತರ ರವೀಶ್, ಸ್ವೀಪ್ ಸಮಿತಿ ಸಹಾಯಕ ನೋಡೆಲ್ ಅಧಿಕಾರಿ ಜಿ. ಆರ್. ಶ್ರೀನಿವಾಸ್,  ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಯಪಾಲ್, ತಾಲೂಕ್ ಪಂಚಾಯತ್ ಎಡಿ ಮಂಜುನಾಥ್,  ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ. ಸೇರಿದಂತೆ ಮತ್ತಿತ ರರು ಉಪಸ್ಥಿತರಿದ್ದರು.