Thursday, 15th May 2025

Actor Darshan: ಚಾಲೆಂಜಿಂಗ್‌ ಸ್ಟಾರ್‌ಗೆ ಬಿಗ್ ಚಾಲೆಂಜ್‌;‌ ‌ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ (Actor Darshan) ಅವರಿಗೆ ಹೈಕೋರ್ಟ್‌ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ (ಡಿ. 4) ಮೇಲ್ಮನವಿ ಸಲ್ಲಿಸಲಾಗಿದೆ. ಸದ್ಯ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗಾಗಿ ಜಾಮೀನಿನ ಮೇಲೆ ಹೊರಗಿರುವ ದರ್ಶನ್‌ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಪ್ರಾಸಿಕ್ಯೂಷನ್‌(Prosecution) ಪರವಾಗಿ ವಕೀಲರು ಸುಪ್ರೀಂ ಕೋರ್ಟ್‌ಗೆ(Supreme Court) ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದ್ದು, ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಮಂಜೂರು ಮಾಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಡಿ. 6 ಅಥವಾ ಡಿ. 9ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿದಂತೆ 17 ಮಂದಿ ಬಂಧನವಾಗಿತ್ತು. ಪ್ರಕರಣದಲ್ಲಿ ದರ್ಶನ್‌ ಎ2 ಆರೋಪಿಯಾಗಿದ್ದು, ಒಂದಷ್ಟು ತಿಂಗಳು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಅಲ್ಲಿ ವಿಶೇಷ ಆತಿಥ್ಯವನ್ನು ಪಡೆದ ಆರೋಪದ ಮೇಲೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಅವರನ್ನು ಸ್ಥಳಾಂತರಿಸಲಾಯಿತು. ಈ ಮೊದಲಿನಿಂದಲೂ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್‌ ಅನಾರೋಗ್ಯ ಕಾರಣ ನೀಡಿ ಅ. 30ರಂದು ಜೈಲಿನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಹೊರಬಂದಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನನ್ನು ರದ್ದು ಮಾಡಬೇಕು ಎಂದು ಸರ್ಕಾರದ ಪರ ವಕೀಲರಿಂದ ಬುಧವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಒಂದು ವೇಳೆ ಸುಪ್ರೀಂ ಕೋರ್ಟ್‌ ದರ್ಶನ್‌ ಮಧ್ಯಂತರ ಜಾಮೀನಿಗೆ ಸಂಬಂಧಿಸಿದಂತೆ ಕೊಕ್ಕೆ ಹಾಕಿದರೆ ನಟ ಮತ್ತೆ ಜೈಲು ಪಾಲಾಗಬೇಕಾಗುತ್ತದೆ. ಸದಾ ಒಂದಿಲ್ಲೊಂದು ಸಂಕಷ್ಟಕ್ಕೆ ಗುರಿಯಾಗುತ್ತಿರುವ ದರ್ಶನ್‌ ಈ ಸುದ್ದಿಯಿಂದ ಮತ್ತಷ್ಟು ಆತಂಕಗೊಂಡಿರುತ್ತಾರೆ.

ಏನಿದು ಪ್ರಕರಣ?

ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬ ವ್ಯಕ್ತಿ ಅಸಭ್ಯವಾಗಿ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ಆತನನ್ನು ದರ್ಶನ್ ಗ್ಯಾಂಗ್ ಚಿತ್ರದುರ್ಗದಿಂದ ಕರೆತಂದಿದ್ದರು. ಜೂ. 8ರಂದು ರೇಣುಕಾಸ್ವಾಮಿ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಪ್ರಕರಣ ಬಯಲಿಗೆ ಬಂದಿತ್ತು. ಕೊಲೆ ನಡೆದ ಎರಡು ದಿನಗಳ ಬಳಿಕ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು.

ರೇಣುಕಾಸ್ವಾಮಿ ಕೊಲೆಯಾದ ಬಳಿಕ ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ಗಾಗಿ ಮೈಸೂರಿಗೆ ತೆರಳಿದ್ದರು. ಜೂ. 11ರಂದು ಮೈಸೂರಿನ ಹೋಟೆಲ್ ನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಪೊಲೀಸರು ಅದೇ ದಿನ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತಂದಿದ್ದರು. ದರ್ಶನ್‌ ಬಂಧನ ಸ್ಯಾಂಡಲ್‌ವುಡ್‌ನಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ನಟ ದರ್ಶನ್ ಅವರನ್ನು ಬಂಧಿಸಿದ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದ್ದರು. ಬಳಿಕ ನಟಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಕೂಡ ಪೊಲೀಸರು ಬಂಧಿಸಿದರು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದರು.

ಜೂ. 11ರಂದು ಬಂಧನಕ್ಕೊಳಗಾದ ದರ್ಶನ್‌ ಸರಿ ಸುಮಾರು 12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದರು. ನಂತರ ಅವರನ್ನು ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಯಿತು. ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಿದರು. ಈ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಎ1, ದರ್ಶನ್ ಎ2 ಆರೋಪಿಯಾಗಿದ್ದಾರೆ. ಅರೆಸ್ಟ್‌ ಆಗಿ ಆರು ತಿಂಗಳುಗಳಾದರೂ ದರ್ಶನ್‌ ಗೆ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ.

ಈ ಸುದ್ದಿಯನ್ನೂ ಓದಿ: Kodi Mutt Swamiji: ದರ್ಶನ್, ಸಿದ್ದರಾಮಯ್ಯ ಬಗ್ಗೆ ಕೋಡಿಮಠ ಶ್ರೀ ಸ್ಫೋಟಕ ಭವಿಷ್ಯ!