Sunday, 11th May 2025

Kannada sahitya sammelana: ಕನ್ನಡವೇ ಕಲಿಕೆಯ ಮಾಧ್ಯಮವಾಗಲಿ; ರಾಜ್ಯ ಸರ್ಕಾರಕ್ಕೆ ಸಮ್ಮೇಳನಾಧ್ಯಕ್ಷ ಗೊರುಚ 21 ಹಕ್ಕೊತ್ತಾಯ

ಮಂಡ್ಯ: ಒಂದರಿಂದ ಹತ್ತನೇ ತರಗತಿಯವರೆಗೆ ಕನ್ನಡವೇ ಕಲಿಕೆಯ ಮಾಧ್ಯಮ ಆಗಬೇಕು, ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೆ ತರಬೇಕು ಎಂಬುವುದು ಸೇರಿ ಹಲವು ಹಕ್ಕೊತ್ತಾಯಗಳನ್ನು (Kannada sahitya sammelana) ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ (Go.ru. Channabasappa) ಅವರು ಸರ್ಕಾರದ ಮುಂದೆ ಮಂಡಿಸಿದರು.

ಅಧ್ಯಕ್ಷರ ಹಕ್ಕೊತ್ತಾಯಗಳು ಹೀಗಿವೆ:

1. ಪ್ರಾಥಮಿಕ ಒಂದನೆಯ ತರಗತಿಯಿಂದ ಹತ್ತನೆಯ ತರಗತಿಯವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಕೂಡದು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು.

2. ಅಗತ್ಯವೆನಿಸಿರುವ ಇಂಗ್ಲಿಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವ್ಯಯದಲ್ಲಿ ಕನಿಷ್ಟ ಶೇ.15ರಷ್ಟು ಭಾಗ ಶಿಕ್ಷಣಕ್ಕೆ ಮೀಸಲಿರಬೇಕು.

3. ಕಳೆದ ಅನೇಕ ದಶಕಗಳಿಂದ ನನೆಗುದಿಗೆ ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಅನುಷ್ಠಾನದ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಬೇಕು. ಸಾರ್ವಜನಿಕವಿರಲಿ, ಖಾಸಗಿಯಿರಲಿ ಉದ್ಯೋಗಾವಕಾಶಗಳಲ್ಲಿ ವಿಶೇಷ ಅರ್ಹತೆಯ ಉನ್ನತ ಹುದ್ದೆಗಳ ಹೊರತಾಗಿ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು. ಕಾಲ-ಕಾಲಕ್ಕೆ ಉದ್ಯೋಗ ಮಾಹಿತಿ ದೊರೆಯುವಂತಾಗಬೇಕು.

4. ನಾಡಿನ ವಿಶೇಷ ವ್ಯವಸ್ಥೆಗಳಾದ ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳು ಅನುಭವಿಸುತ್ತಿರುವ ಹಣಕಾಸು ಮತ್ತು ಭೋದನಾ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಕೂಡಲೇ ಕ್ರಮಕೈಗೊಳ್ಳಬೇಕು.

5. ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರವನ್ನು ಸ್ವತಂತ್ರ ಸ್ವಾಯತ್ತ ಕೇಂದ್ರವನ್ನಾಗಿ ಬೆಳೆಸಲು ಮತ್ತು ಕೇಂದ್ರದ ನೆರವನ್ನು ಪಡೆಯಲು ಅಗತ್ಯ ವ್ಯವಸ್ಥೆಮಾಡಬೇಕು.

6. ಅಪಾರ ಸಂಭಾವ್ಯ ಸಾಮರ್ಥ್ಯವಿರುವ ಪ್ರವಾಸೋದ್ಯಮವನ್ನು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ದೃಷ್ಟಿಯಿಂದಷ್ಟೇ ಅಲ್ಲದೆ ಆದಾಯ ಮತ್ತು ಉದ್ಯೋಗಾವಕಾಶ ದೃಷ್ಟಿಯಿಂದಲೂ ಅದನ್ನು ವಿಸ್ತರಣೆಯ ವಲಯವನ್ನಾಗಿ ಅಭಿವೃದ್ಧಿಗೊಳಿಸಬೇಕು.

7. ಕೈಗಾರಿಕೋದ್ಯಮಗಳ ಸ್ಥಾಪನೆ ಎಲ್ಲ ಜಿಲ್ಲೆಗಳಿಗೂ ಹಂಚಿಕೆಯಾಗಬೇಕು. ಯಾವುದೇ ಉದ್ಯಮವಿರಲಿ, ಅಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶದ ಕಟ್ಟುನಿಟ್ಟಿನ ಷರತ್ತು ವಿಧಿಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.

8. ಸರ್ಕಾರದ ಸಚಿವಾಲಯ ಕಛೇರಿಗಳ ಹೊರತಾಗಿ, ಉಳಿದ ಇಲಾಖೆಗಳ ನಿರ್ದೇಶನಾಲಯ ಕಛೇರಿಗಳನ್ನು ಬೇರೆ ಬೇರೆ ಜಿಲ್ಲಾ ಕೇಂದ್ರಗಳಿಗೆ ವರ್ಗಾಯಿಸಿ ಬೆಂಗಳೂರಿನ ಒತ್ತಡವನ್ನು ತಪ್ಪಿಸಬೇಕು.

9. ಶಿಕ್ಷಣ ಮಾಧ್ಯಮ ಅಂತಾರಾಜ್ಯ ಗಡಿ, ಜಲ ಮತ್ತು ವಲಸೆ ಸಮಸ್ಯೆಗಳನ್ನು ಪರಿಹರಿಸಲು ಒಂದು ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು.

10. ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸುವ ದಿಸೆಯಲ್ಲಿ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕಾಲಬದ್ಧ ಕ್ರಮಕೈಗೊಳ್ಳಬೇಕು.

11. ಬಸವಣ್ಣನವರನ್ನು ರಾಜ್ಯದ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿರುವ ಮತ್ತು ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪವನ್ನು ನಿರ್ಮಿಸುತ್ತಿರುವ ರಾಜ್ಯ ಸರ್ಕಾರ, ಹನ್ನೆರಡನೆಯ ಶತಮಾನದ ಶರಣರ ಕ್ಷೇತ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ಕಾಗಿ ಒಂದು ಸ್ವಾಯತ್ತ ಪ್ರಾಧಿಕಾರ ರಚಿಸಬೇಕು. ಈಗಾಗಲೇ ಆಶ್ವಾಸನೆ ನೀಡಿರುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸಬೇಕು.

12. ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಕೈಗಾರಿಕೆಗಳು, ಕಚೇರಿಗಳು, ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಕನ್ನಡದಲ್ಲಿರುವುದು ಕಡ್ಡಾಯವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.

13. ಪರಿಸರದ, ವಿಶೇಷವಾಗಿ, ಪಶ್ಚಿಮಘಟ್ಟಗಳ ರಕ್ಷಣೆಗೆ ಕಟ್ಟುನಿಟ್ಟಾದ ಕ್ರಮಕೈಗೊಳ್ಳಬೇಕು. ಅಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು.

14. ಜ್ಞಾನಪ್ರಸಾರದ ಕೇಂದ್ರದಂತಿರುವ ಗ್ರಂಥಾಲಯ ಪೋಷಣೆಯ ಬಗೆಗೆ ಪೂರ್ಣ ಗಮನಕೊಡಬೇಕು. ಗ್ರಂಥಗಳ ಸಗಟು ಕೊಳ್ಳಿಕೆ ಪ್ರತಿವರ್ಷ ತಪ್ಪದೇ ನಡೆಯಬೇಕು. ಗ್ರಂಥಾಲಯ ತೆರಿಗೆಯಿಂದ ಸಂಗ್ರಹವಾದ ಹಣವನ್ನು ಗ್ರಂಥಾಲಯಗಳ ಅಭಿವೃದ್ಧಿಗೇ ಬಳಸಬೇಕು.

15. ಹಿರಿಯ ಸಾಹಿತಿಗಳ ಸಮಗ್ರ ಸಾಹಿತ್ಯ ಪ್ರಕಟಣೆ ಒಂದು ಒಳ್ಳೆಯ ಯೋಜನೆಯಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕು.

16. ಆಡಳಿತದಲ್ಲಿ ಕನ್ನಡ ಬಳಕೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ಕನ್ನಡ ಲಿಪಿಯನ್ನು ಆಧುನಿಕ ತಂತ್ರ ವಿಧಾನಗಳಿಗೆ ಹೊಂದಿಸುವ ಕೆಲಸ ತ್ವರಿತವಾಗಿ ನಡೆಯಬೇಕು. ಯಾಂತ್ರಿಕ ಬುದ್ಧಿಮತ್ತೆ ತಂತ್ರದ ಬಳಕೆ ಹೆಚ್ಚಾಗಬೇಕು.

17. ಸಾಹಿತ್ಯ-ಸಂಸ್ಕೃತಿ ಸಂಬಂಧದ ಸಂಘ-ಸಂಸ್ಥೆಗಳಿಗೆ ಉದಾರ ಧನ ಸಹಾಯ ದೊರಕಿಸಬೇಕು.

18. ಯಾವುದೇ ಕಾರಣಕ್ಕೆ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಅವಕಾಶ ಕೊಡಬಾರದು.

19. ಕನ್ನಡದ ಕೃತಿಗಳನ್ನು ಅನ್ಯಭಾಷೆಗೆ ಅನುವಾದಿಸಿ ಪ್ರಕಟಿಸುವ ಕೆಲಸ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು. ಇದಕ್ಕಾಗಿ ಭಾಷಾ ಪ್ರಾಧಿಕಾರಕ್ಕೆ ಅಗತ್ಯ ನೆರವು ಒದಗಿಸಬೇಕು.

20. ಕನ್ನಡ ಸಾಹಿತ್ಯ ಪರಿಷತ್ತು ಒಂದು ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಅದು ನಡೆಸುವ ಇಂತಹ ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಳಂಬ ಮಾಡದೆ ಅದನ್ನು ಅನುಷ್ಠಾನಗೊಳಿಸಬೇಕು.

21. ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಕರಿಗೆ ಸಾಹಿತ್ಯ-ಸಂಸ್ಕೃತಿಗಳ ಬಗೆಗೆ ನಿಯತಕಾಲಿಕ ಶಿಬಿರಗಳನ್ನು ನಡೆಸಿ, ಅವರಲ್ಲಿ ಸಾಹಿತ್ಯದ ಅಧ್ಯಯನಾಸಕ್ತಿ ಬೆಳೆಸಬೇಕು.

ಈ ಸುದ್ದಿಯನ್ನೂ ಓದಿ | Kannada sahitya sammelana: ಆಂಗ್ಲ ಮಾಧ್ಯಮ ಶಾಲೆ ತೆರೆಯುವಿಕೆ ನಿಲ್ಲಿಸಿ, ಖಾಸಗಿ ಶಾಲೆಗಳಿಗೂ ಅನುಮತಿ ಬೇಡ: ಗೊ.ರು. ಚನ್ನಬಸಪ್ಪ ಆಗ್ರಹ