Thursday, 15th May 2025

ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆ

ಮೂಡಿಗೆರೆ: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಭಾನುವಾರ ಬಾವಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಜಿ.ಹೊಸಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ (19ವರ್ಷ) ಎನ್ನಲಾಗಿದೆ. ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಸೃಷ್ಟಿ ನಾಪತ್ತೆಯಾಗಿದ್ದಳು.

ಭಾನುವಾರ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸೃಷ್ಟಿ ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿ.21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶ ಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.

ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *