Monday, 12th May 2025

ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಿ: ಸಿಎಂ ಗೆ ಸಿದ್ದರಾಮಯ್ಯ ಒತ್ತಾಯ

ಬಾದಾಮಿ: ವಿಧಾನಸಭೆ ಕ್ಷೇತ್ರದ ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕ್ಷೇತ್ರದಿಂದ ಆಗಮಿಸಿದ್ದ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಕೂಡಲೇ ದೂರವಾಣಿ ಮೂಲಕ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, 2018-19 ನೇ ಸಾಲಿನ ಬಜೆಟ್ ನಲ್ಲಿ 525 ಕೋಟಿ ರೂ. ವೆಚ್ಚದ ಕೆರೂರು ಏತ ನೀರಾವರಿ ಯೋಜನೆ ಘೋಷಣೆಯಾಗಿ 300 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿತ್ತು. ಆದರೆ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ. ಮುಂಬರುವ ಬಜೆಟ್ ನಲ್ಲಿ ಯೋಜನೆ ಜಾರಿಗೆ ಅನುದಾನ ಮಂಜೂರು ಮಾಡಬೇಕು ಎಂದರು.

ಜೊತೆಗೆ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ 1800 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಸಂಬಂಧ ಸಲ್ಲಿಸಿರುವ ಪ್ರಸ್ತಾವನೆ ಕುರಿತಾಗಿಯೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕೆರೂರು ಏತ ನೀರಾವರಿ ಯೋಜನೆ ಸಂಬಂಧ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ, ಯೋಜನೆ ಜಾರಿಗೆ ತರದಿದ್ದರೆ ವಿಧಾನಸಭೆಯಲ್ಲಿ ಧರಣಿ ನಡೆಸುವುದಾಗಿ ಹೇಳಿದರು.

Leave a Reply

Your email address will not be published. Required fields are marked *